
ಬೆಂಗಳೂರು: ಸಕ್ಕರೆ ಕಾರ್ಖಾನೆ ಆರಂಭಿಸಲು ಅನುಮತಿ ನೀಡದಿದ್ದಕ್ಕೆ ಮಾಡುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಮುಖ್ಯಮಂತ್ರಿಯವರು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ಗೆ ಬುಧವಾರ (ಆಗಸ್ಟ್ 28) ದೂರವಾಣಿ ಕರೆ ಮಾಡಿ ಮಾತನಾಡಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ, ಏನಾದರೂ ಸಮಸ್ಯೆ ಇದ್ದರೆ ಕಾನೂನಾತ್ಮಕವಾಗಿ ಅದನ್ನು ಬಗೆಹರಿಸೋಣ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.
ನ್ಯಾಯಾಲಯದ ಆದೇಶದ ನಂತರವೂ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದೇ ಇರುವುದರ ವಿರುದ್ಧ ಯತ್ನಾಳ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೂಡ ಭೇಟಿ ನೀಡಿ ಬೆಂಬಲ ನೀಡಿದ್ದರು.
ಪ್ರಕರಣದ ಹಿನ್ನೆಲೆ
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ್ದಾಗಿದೆ. ಈ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ ಉತ್ಪಾದನೆ ಮಾಡಲಾಗುತ್ತಿತ್ತು. ಇದಕ್ಕೆ ಸಂಬಂಧಿಸಿ ಪರವಾನಗಿ ನವೀಕರಣ ಆಗಿಲ್ಲವೆಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಯನ್ನು ಮುಚ್ಚಿತ್ತು.
ಮಂಡಳಿಯ ತೀರ್ಮಾನದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಕಾರ್ಖಾನೆ ಪುನಾರಾರಂಭಿಸಲು ಹೈಕೋರ್ಟ್ ಕೆಲ ದಿನಗಳ ಹಿಂದೆ ಆದೇಶ ನೀಡಿತ್ತು. ಆದೇಶವನ್ನು ಪಾಲಿಸದೇ ಮಂಡಳಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿತ್ತು. ಹೀಗಾಗಿ ನ್ಯಾಯಾಲಯದ ಆದೇಶವನ್ನು ಪಾಲಿಸದ ಮಂಡಳಿ ವಿರುದ್ಧ ಯತ್ನಾಳ್ ಪ್ರತಿಭಟನೆ ಮಾಡುತ್ತಿದ್ದಾರೆ.
Poll (Public Option)

Post a comment
Log in to write reviews